ಬೆಂಗಳೂರು, ಏಪ್ರಿಲ್ 22 (ಐಎಎನ್ಎಸ್) ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30 ರಂದು ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ಶನಿವಾರ ತಿಳಿಸಿದ್ದಾರೆ.
ಬಿಜೆಪಿಯು ಹಿಡಿತದಲ್ಲಿರದ ರಾಜ್ಯದ ಕೆಲವು ಭಾಗಗಳಲ್ಲಿ ಬಿಜೆಪಿ ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾದಳ-ಜಾತ್ಯತೀತ ನಾಯಕ ಎಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಈ ಕ್ಷೇತ್ರ ಅಭ್ಯರ್ಥಿಯಾಗಿ ಸ್ಫರ್ಧಿಸಲಿದ್ದಾರೆ. ಈ ಕ್ಷೇತ್ರ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆಗೆ ಸಾಕ್ಷಿಯಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಇನ್ನೂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪಕ್ಕದ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಪ್ರದೇಶವನ್ನು ಜೆಡಿಎಸ್ನ ಭದ್ರಕೋಟೆ ಎಂದು ಪರಿಗಣಿಸಲಾಗಿದೆ.
ಭಾರತೀಯ ಜನತಾ ಪಕ್ಷ ಚನ್ನಪಟ್ಟಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ. ಸದ್ಯ ಶೆಟ್ಟಿಹಳ್ಳಿ ಗ್ರಾಮದಲ್ಲಿ ರ್ಯಾಲಿಗೆ ಸಿದ್ಧತೆ ನಡೆದಿದೆ. ಮೂಲಗಳ ಪ್ರಕಾರ, 2-3 ಲಕ್ಷ ಜನರು ಕುಳಿತುಕೊಳ್ಳಲು ಬೃಹತ್ ವೇದಿಕೆ ಮತ್ತು ಶೆಲ್ಟರ್ ನಿರ್ಮಿಸಲಾಗುತ್ತಿದೆ. ಪಕ್ಕದ ಜಿಲ್ಲೆಗಳಾದ ತುಮಕೂರು, ಮಂಡ್ಯ ಮತ್ತು ಮೈಸೂರಿನಿಂದ ಬಿಜೆಪಿ ಕಾರ್ಯಕರ್ತರನ್ನು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಚನ್ನಪಟ್ಟಣದಲ್ಲಿ ಈ ಬಾರಿ ರೋಡ್ ಶೋ ಇರುವುದಿಲ್ಲ ಎಂದು ಯೋಗೇಶ್ವರ್ ಶನಿವಾರ ಹೇಳಿದ್ದಾರೆ. ಸುಮಾರು 2 ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಹಳೇ ಮೈಸೂರು ಭಾಗದಲ್ಲಿ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.