ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿದ್ದು, ಇನ್ನು ಮತ ಎಣಿಕೆಗೆ ರಾಜ್ಯದ ಜನತೆ ಕಾತರದಿಂದ ಕಾಯುತ್ತಿದೆ. ಇನ್ನು ಈ ಬಾರಿಯ ಮತದಾನದ ಪ್ರಮಾಣ ಹೆಚ್ಚಾಗಿದ್ದರೂ ಕೂಡ ಎಲ್ಲೋ ಚುನಾವಣಾ ಫಲಿತಾಂಶ ಅತಂತ್ರ ಪರಿಸ್ಥಿತಿಯನ್ನು ತಲುಪುವ ಭೀತಿ ಎಲ್ಲಾ ರಾಜಕೀಯ ನಾಯಕರಿಗೂ ಎದುರಾಗಿದೆ.
ಈಗಾಗಲೇ ಬಿಜೆಪಿ, ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬಹುದೆಂಬ ಚರ್ಚೆ ಭರ್ಜರಿಯಾಗಿ ನಡೆಯುತ್ತಿದ್ದು, ಎಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ರೂಪುಗೊಳ್ಳುತ್ತದೆಯೋ ಎಂಬ ಆತಂಕವೂ ಇದೆ.
ಬಿಜೆಪಿಯಲ್ಲಿ ಹಲವರು ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಂಚೂಣಿಯಲ್ಲಿದ್ದಾರೆ. ಇನ್ನು ಈಗಿರುವ ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಂಡಿದ್ದಾರೆ. ಇನ್ನು ಇವರುಗಳ ಜೊತೆಗೆ ಸಚಿವ ಮುರುಗೇಶ್ ನಿರಾಣಿ, ಶಾಸಕ ಅರವಿಂದ್ ಬೆಲ್ಲದ್ ಕೂಡ ಪಟ್ಟಿಯಲ್ಲಿದ್ದಾರೆ.
ಇನ್ನು ಕಾಂಗ್ರೆಸ್ ನಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆಯೇ ಜಟಾಪಟಿ ನಡೆಯುತ್ತಿದೆ. ಇವರಿಬ್ಬರಲ್ಲದೆ ಎಂ.ಬಿ. ಪಾಟೀಲ್, ಸತೀಶ್ ಜಾರಿಕಿಹೊಳಿ. ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಸರು ಕೇಳಿ ಬಂದಿದೆ.
ಜೆಡಿಎಸ್ ನಿಂದ ಹೆಚ್.ಡಿ.ಕುಮಾರಸ್ವಾಮಿ ಅವರೇ ಕಿಂಗ್ ಮೇಕರ್ ಆಗಲಿದ್ದಾರೆ ಎನ್ನಲಾಗಿದೆ.
ಹಲವಾರು ಸಮೀಕ್ಷೆಗಳ ಆಧಾರದ ಮೇಲೆ ಈ ಬಾರಿ ಕಾಂಗ್ರೆಸ್ ಆಡಳಿತಕ್ಕೆ ಬರಲಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಗದ್ದುಗೆ ಅಲಂಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.