ಕರ್ನಾಟಕ ಚುನಾವಣೆಯಲ್ಲಿ ಬಹುಮತ ಸಾಧಿಸಿದ ಕಾಂಗ್ರೆಸ್ ಪಕ್ಷ ಸರ್ಕಾರ ದ ರಚನೆಯಲ್ಲಿ ತೊಡಗಿದ್ದು, ೬೬ ಸೀಟು ಪಡೆದು ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿ ಪಕ್ಷದಲ್ಲಿ ವಿಪಕ್ಷ ನಾಯಕರು ಯಾರಾಗಬೇಕು ಎನ್ನುವ ಚರ್ಚೆ ನಡೆಯುತ್ತಿದೆ.
ಮೂರು ವರ್ಷಗಳ ಕಾಲ ಆಡಳಿತ ನಡೆಸಿದ್ದ ಬಿಜೆಪಿ ಈ ಬಾರಿಯೂ ರಾಜ್ಯದಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿತ್ತು ಆದರೆ ಬಿಜೆಪಿ ನಡೆಸಿದ ಕಸರತ್ತುಗಳು ವಿಫಲವಾಗಿ ಕಡಿಮೆ ಸೀಟು ಗೆದ್ದು ವಿರೋಧ ಪಕ್ಷದ ಸ್ಥಾನದಲ್ಲಿದೆ.
ಸರ್ಕಾರದ ಕಾರ್ಯವೈಖರಿ, ಆಡಳಿತ, ಆಗುಹೋಗು, ನಿರ್ಧಾರ,ನಿರ್ಣಯಗಳು, ಹೀಗೆ ಎಲ್ಲಾ ವಿಚಾರಗಳನ್ನುಗಳನ್ನು ಸಮರ್ಥವಾಗಿ ನಿರ್ವಹಿಸುವ ವಿರೋಧ ಪಕ್ಷದ ನಾಯಕನ ಸ್ಥಾನ ಮುಖ್ಯಮಂತ್ರಿ ಸ್ಥಾನದಷ್ಟೇ ಪ್ರಮುಖವಾದದ್ದು. ಆದರಿಂದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಹೊರೆ ಬಿಜೆಪಿ ಪಕ್ಷದ ಮೇಲಿದೆ. ಇಂದಿನ ಪರಿಸ್ಥಿತಿಯಲ್ಲಿ ಬಿಜೆಪಿ ಪಕ್ಷದಿಂದ ಗೆದ್ದ ಶಾಸಕರಲ್ಲಿ ಈ ಸ್ಥಾನಕ್ಕೆ ಯಾರು ಆರ್ಹರು ಎಂದು ನಿರ್ಧಾರಿಸುವುದು ಹೈಕಮಾಂಡ್ಗೆ ಸವಾಲಾಗಿ ಪರಿಣಮಿಸಿದೆ.
ಇನ್ನು ವಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಆರ್ ಅಶೋಕ, ವಿಜಯೇಂದ್ರ, ಬಸನಗೌಡ ಪಾಟೀಲ ಯತ್ನಾಳ, ಕಾರ್ಕಳದ ಸುನೀಲ್ ಕುಮಾರ್, ಸುರೇಶ ಕುಮಾರ್ ಹಾಗೂ ಡಾ. ಸಿಎನ್ ಅಶ್ವತ್ಧ ನಾರಾಯಣ್ ಅವರ ಹೆಸರುಗಳು ಕೇಳಿ ಬರುತ್ತಿವೆ ಎಂದು ಹೇಳಲಾಗುತ್ತಿದೆ.
ಬಿಜೆಪಿಯ ಹೀನಾಯ ಸೋಲಿನ ಫಲವಾಗಿ ರಾಜಾಧ್ಯಕ್ಷರಾದ ನಟೀನ್ಕುಮಾರ್ ಕಟೀಲ್ ಅವರನ್ನು ಕೂಡ ಬದಲಾವಣೆ ಮಾಡುವ ಮಾತುಗಳು ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ.
ಲೋಕಸಭಾ ಚುನಾವಣೆಯನ್ನೂ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ಹಾಗೂ ಸಂಘಟನ ಬಲ ಹೊಂದಿರುವ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಹಿಂದುಳಿದ ವರ್ಗ ಅಥವಾ ಒಕ್ಕಲಿಗ ಸಮುದಾಯಕ್ಕೆ ಮನ್ನಣೆ ನೀಡುವ ಸಾಧ್ಯತೆ ಹೆಚ್ಚಿದೆ.
ಒಕ್ಕಲಿಗ ಸಮುದಾಯದವರನ್ನೇ ಪರಿಗಣಿಸಿದರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಥವಾ ಸಿ.ಟಿ. ರವಿ ಹೆಸರು ಮುಂಚೂಣಿಯಲ್ಲಿದೆ. ಹಾಗೆಯೇ ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿಗೆ ನೀಡುವುದಾದರೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೆಸರು ಕೇಳಿಬರುತ್ತಿದೆ.
ಮುಂಬರಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾಧ್ಯಕ್ಷರ ಮತ್ತು ವಿಪಕ್ಷ ನಾಯಕರ ನೇಮಕವನ್ನು ಹೈಕಮಾಂಡ್ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಒಂದು ವಾರದಲ್ಲಿ ಶಾಸಕಾಂಗ ಸಭೆ ನಡೆಯಲಿದ್ದು ಅದರಲ್ಲಿ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ ಆನಂತರವೇ ರಾಜಾಧ್ಯಕ್ಷರ ನೇಮಕವಾಗಲಿದೆ ಎಂದು ಹೇಳಲಾಗುತ್ತಿದೆ.