ಮಂಗಳೂರು: ಬುಧವಾರ ಬೆಳ್ಳಂಬೆಳಿಗ್ಗೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇಂದು ಬೆಳಿಗ್ಗೆಯಿಂದ ಅಧಿಕಾರಿಗಳು ಕೆಲವೊಂದು ಮನೆಗಳು, ಕಚೇರಿ, ಒಂದು ಆಸ್ಪತ್ರೆ ಸೇರಿದಂತೆ ೧೮ ಕಡೆಗಳಲ್ಲಿ ಧಾಳಿ ನಡೆಸಿ ಪರಿಶೀಲನೆ ನಡೆಸುತಿದ್ದಾರೆ. ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಬಿಹಾರದ ಪಾಟ್ನಾದಲ್ಲಿ ಪ್ರಧಾನಿ ಮೋದಿ ಅವರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ವಿದೇಶೀ ಹಾಗೂ ದೇಶೀಯ ಭಯೋತ್ಪಾದನಾ ಸಂಘಟನೆಗಳು ತಮ್ಮ ಉಗ್ರರ ಮೂಲಕ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಅಘಾತಕಾರಿ ಅಂಶ ಗುಪ್ತಚರ ಇಲಾಖೆ ಪತ್ತೆ ಮಾಡಿತ್ತು. ಮಾಹಿತಿಯ ಪ್ರಕಾರ ಮೋದಿ ಅವರನ್ನು ಹತ್ಯೆಗೈಯ್ಯುವುದೇ ಈ ಸಂಘಟನೆಗಳ ಗುರಿ ಆಗಿತ್ತು.
ನಂತರ ಈ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಐಎನ್ಎ ಅಧಿಕಾರಿಗಳು ಫುಲ್ವಾರಿ ಶರೀಫ್ ಎಂಬುವವನನ್ನು ಬಂಧಿಸಿದ್ದರು. ಈ ವಿಧ್ವಂಸಕ ಕೃತ್ಯ ನಡೆಸಲು ದಕ್ಷಿಣ ಕನ್ನಡದಿಂದ ಹಣಕಾಸು ನೆರವು ಪಡೆಯಲಾಗುತಿತ್ತು ಎಂದು ತನಿಖೆಯ ವೇಳೆ ತಿಳಿದು ಬಂದಿತ್ತು.
ಕೊಲ್ಲಿ ರಾಷ್ಟ್ರಗಳಿಂದ ಈ ಹಣವನ್ನು ಹವಾಲಾ ರೂಪದಲ್ಲಿ ಭಾರತಕ್ಕೆ ರವಾನಿಸಲಾಗುತಿತ್ತು.
ಈ ಹಣದಿಂದ ದೇಶಾದ್ಯಂತ ಭಯೋತ್ಪಾದನಾ ಕೃತ್ಯಗಳನ್ನು ಎಸಗಲು ಸಂಚು ರೂಪಿಸಲಾಗಿತ್ತು. ಈ ಹಣದ ಮೂಲಕ್ಕೆ ಸಂಬಂದಿಸಿದಂತೆ ಇಂದು ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ ಅನೇಕ ಕಡೆಗಳಲ್ಲಿ ದಾಳಿಮಾಡಿ ಪರಿಶೀಲನೆ ನಡೆಸಿದ್ದಾರೆ.
ಪಾಟ್ನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮಾರ್ಚ್ ತಿಂಗಳಿನಲ್ಲಿಯೂ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು. . ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿದ ಆರೋಪ ಇವರ ಮೇಲಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೂ ಸಹ ಇವರ ಮೇಲಿತ್ತು. ಈ ಪ್ರಕರಣವು ತನಿಖೆಯ ಹಂತದಲ್ಲಿದ್ದು ಹೆಚ್ಚಿನ ಮಾಹಿತಿ ದೊರೆತ ನಂತರ ಈ ದಾಳಿ ನಡೆಸಲಾಗಿದ್ದು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.