ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಚುನಾವಣೆಗೂ ಮೊದಲೇ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಥಾನಗೊಳಿಸುವ ಸಂಬಂಧ ಶುಕ್ರವಾರ ಸಂಪುಟ ಸಭೆ ನಡೆಸಿ ಘೋಷಿಸಿದ ಬೆನ್ನಲ್ಲೇ ಜೆ ಡಿ ಎಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಗಳ ಮೂಲಕ ವ್ಯಂಗ್ಯವಾಡಿದ್ದಾರೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಪತ್ರಿಕಾ ಗೋಷ್ಟಿ ನಡೆಸಿ ಗ್ಯಾರಂಟಿ ಯೋಜನೆಗಳು ಜುಲೈ ತಿಂಗಳಿನಿಂದಲೇ ಜಾರಿಗೆ ಬರಲಿವೆ ಎಂದು ಘೋಷಿಸಿದ್ದರು. ಈ ಬೆನ್ನಲ್ಲೇ ಗ್ಯಾರಂಟಿ ಯೋಜನೆಗಳಿಗೆ ಷರತ್ತನ್ನು ವಿಧಿಸಿರುವ ಕ್ರಮವನ್ನು ಕಟುವಾಗಿ ಟೀಕಿಸಿರುವ ಕುಮಾರ ಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ , ‘ಷರತ್ತು ಸಹಿತವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ’ ಎಂದು ಲೇವಡಿ ಮಾಡಿದ್ದಾರೆ.
‘ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ. ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.
‘ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿದೆ’ ಎಂದು ಎಚ್ಡಿಕೆ ತಿಳಿಸಿದ್ದಾರೆ.
‘ಮುಗ್ಧ ಯುವಜನರಿಗೆ ₹3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಸರ್ಕಾರವನ್ನು ಕುಟುಕಿದ್ದಾರೆ.
‘ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡ್ಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
‘ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಎಂದಿಗೂ ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ಜನರು ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ’ ಎಂದು ಎಚ್ಡಿಕೆ ಭವಿಷ್ಯ ನುಡಿದಿದ್ದಾರೆ.