ಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಸರಣಿ ರೈಲು ಅಪಘಾತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 237ಕ್ಕೆ ಏರಿಕೆಯಾಗಿದೆ. ಸುಮಾರು 900 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ. ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಬೆಂಗಳೂರು- ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲುಗಳ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿದೆ.
ಅಪಘಾತ ಸಂಭವಿಸಿದ್ದು ಹೇಗೆ?
ಬಹನಾಗಾ ರೈಲು ನಿಲ್ದಾಣದ ಬಳಿ 3 ರೈಲು ಮಾರ್ಗಗಳಿದ್ದವು, ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್ನಲ್ಲಿ ನಿನ್ನೆ ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮೊದಲು ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಕೋರಮಂಡಲ್ ಎಕ್ಸ್ಪ್ರೆಸ್ನ 12 ಬೋಗಿಗಳು ಹಳಿ ತಪ್ಪಿ ಮೂರನೇ ರೈಲು ಮಾರ್ಗದ ಮೇಲೂ ಬಿದ್ದಿವೆ. ಕೆಲ ಸಮಯದ ಬಳಿಕ ಇದೇ ಮಾರ್ಗವಾಗಿ ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬೆಂಗಳೂರು-ಹೌರಾ ಎಕ್ಸಪ್ರೆಸ್ (ರೈಲು ಸಂಖ್ಯೆ 12864) ಸಹ ಹಳಿತಪ್ಪಿದ್ದ ಕೋರಮಂಡಲ್ನ ಬೋಗಿಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ಕು ಬೋಗಿಗಳಿಗೆ ಹಳಿತಪ್ಪಿವೆ.
ರಕ್ಷಣಾ ಕಾರ್ಯ ಚರುಕು:
3 ಎನ್ಡಿಆರ್ಎಫ್, 4 ಎಸ್ಡಿಆರ್ಎಫ್, ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ 50 ಆ್ಯಂಬುಲೆನ್ಸ್ಗಳು ದೌಡಾಯಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತದೆ. ಸಾರ್ವಜನಿಕರೂ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನಿಂದ ಹೊರಟಿದ್ದ ಹೌರ ಎಕ್ಸ್ಪ್ರೆಸ್ :
ಹೌರ ಎಕ್ಸ್ಪ್ರೆಸ್ ರೈಲು ಬೆಂಗಳೂರಿನಿಂದ ಪ್ರಯಾಣ ಆರಂಭಿಸಿದ್ದು 1,300 ಪ್ರಯಾಣಿಕರು ಇದ್ದರು. ಇದರಲ್ಲಿ ಎಲ್ಲ ಬೋಗಿಗಳಲ್ಲಿ ಒಟ್ಟು110 ಕನ್ನಡಿಗರು ಇದ್ದರು. ಆದರೆ ಮಧ್ಯಾಹ್ನ ಇಂಜಿನ್ ಬದಲಾವಣೆಗೆ ರೈಲು ನಿಲ್ಲಿಸಿದಾಗ ಮೂರು ಬೋಗಿಯ ಕನ್ನಡಿಗರು ಮೊದಲ ಬೋಗಿಗೆ ಶಿಫ್ಟ್ ಆಗಿದ್ದಾರೆ. ಅಪಘಾತದಲ್ಲಿ ಮಧ್ಯ ಹಾಗೂ ಕೊನೆಯ ಬೋಗಿಗೆ ಹೆಚ್ಚು ಹಾನಿಯಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಸಚಿವ:
ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಗೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ. ರೈಲ್ವೆ, NDRF, SDRF ತಂಡದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ತ್ವರಿತಗತಿಯಲ್ಲಿ ರಕ್ಷಣಾ ಕಾರ್ಯ ನಡೆಸಲು ಸೂಚನೆ ನೀಡಿದ್ದೇನೆ. ರೈಲು ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ. ಪ್ರಕರಣದ ತನಿಖೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದ್ದಾರೆ.
ಮೋದಿಸೇರಿದಂತೆ ವಿವಿಧ ಗಣ್ಯರಿಂದ ಸಂತಾಪ:
ರೈಲು ಅಪಘಾತದಲ್ಲಿ ಮರತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ,ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ, ಅಮಿತ್ ಶಾ ಪಶ್ಚಿಮ ಹಾಗೂ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೃತರು, ಗಾಯಾಳುಗಳಿಗೆ ಪರಿಹಾರ:
ಮೃತರ ಪ್ರತಿ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ:
ಶಾಲಿಮಾರ್-ಕೋರಮಂಡ್ ಎಕ್ಸ್ಪ್ರೆಸ್ ರೈಲು ದುರಂತ ಆಘಾತ ತರಿಸಿದೆ. ರೈಲಿನಲ್ಲಿ ಪಶ್ಚಿಮ ಬಂಗಾಳದವರೇ ಹೆಚ್ಚಿರುವ ಸಾಧ್ಯತೆ ಇದೆ. ಒಡಿಶಾ ಸರಕಾರದ ಜತೆ ನಿರಂತರ ಸಮನ್ವಯ ಸಾಧಿಸಲಾಗುತ್ತಿದೆ. ತುರ್ತು ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ. ರಕ್ಷಣೆಗೆ ನಮ್ಮ ಸರಕಾರ ಎಲ್ಲ ರೀತಿಯ ನೆರವು ನೀಡಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರೈಲಿನಲ್ಲಿದ್ದವರ ಮಾಹಿತಿ ಪಡೆಯಲು ಸಹಾಯವಾಣಿ ಆರಂಭ:
ದಕ್ಷಿಣ ರೈಲ್ವೆ ಜತೆ ಪಶ್ಚಿಮ ಬಂಗಾಳ, ಒಡಿಶಾ ಸರಕಾರಗಳು ಕೈ ಜೋಡಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಗಾಯಾಳುಗಳು, ಮೃತಪಟ್ಟವರ ಮಾಹಿತಿ ಪಡೆಯಲು ಸಹಾಯವಾಣಿ ಸ್ಥಾಪಿಸಲಾಗಿದೆ.
ಬಾಲಸೋರ್- 8249591559
ಹೌರಾ- 033-26382217
ಶಾಲಿಮಾರ್-9332392339
ಖರಗ್ಪುರ-8972073925