ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ 2015ರ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆದಿರುವ ಕರ್ನಾಟಕ ರಾಜ್ಯದ ಜಾತಿಗಣತಿ ವರದಿಯನ್ನು ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಇದರೊಂದಿಗೆ ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಸಿದ್ಧವಾಗಿದ್ದ ವರದಿಗೆ ಮರುಜೀವ ಸಿಗುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿದೆ.
2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜಾತಿಗಳ ಸ್ಥಿತಿಗತಿ ಆಧರಿಸಿ ಶಿಕ್ಷಣ, ಉದ್ಯೋಗ ಸೇರಿ ನಾನಾ ವಲಯಗಳಲ್ಲಿಅವಕಾಶ ಮತ್ತು ಸೌಲಭ್ಯಗಳನ್ನು ಕಲ್ಪಿಸುವ ಆಶಯದೊಂದಿಗೆ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಸರಕಾರಕ್ಕೆ ವರದಿ ಸಲ್ಲಿಕೆಯಾಗುವ ಮುನ್ನವೇ ಸೋರಿಕೆಯಾಗಿ ಭಾರೀ ಚರ್ಚೆಗೆ ಕಾರಣವಾಗಿತ್ತು.
2015ರ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆದ ಜಾತಿಜನಗಣತಿ ಸಮೀಕ್ಷಾ ವರದಿಯನ್ನು ತಯಾರಿಸಲು 162 ಕೋಟಿ ರೂ ವೆಚ್ಚ ಮಾಡಲಾಗಿತ್ತು. 2018ರ ಚುನಾವಣೆ ಬಳಿಕ ಅಧಿಕಾರಕ್ಕೆ ಬಂದ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರ ಹಾಗೂ ನಂತರದ ಬಿಜೆಪಿ ಸರಕಾರದ ಅವಧಿಯಲ್ಲಿ ಈ ವರದಿ ಸ್ವೀಕಾರವಾಗಿರಲಿಲ್ಲ.
ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ 1931ರ ಜನಗಣತಿಯೊಂದಿಗೆ ಜಾತಿಗಣತಿಯೂ ನಡೆದಿತ್ತು. ಅದು ನಡೆದು 90 ವರ್ಷ ಕಳೆದರೂ ದೇಶಾದ್ಯಂತ ಜಾತಿ ಗಣತಿ ನಡೆದೇ ಇಲ್ಲ. 1991ರ ನಂತರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಬಿಸಿ ಮೀಸಲಾತಿ ಜಾರಿಯಾದ ನಂತರ ಜಾತಿಗಣತಿ ನಡೆಯಬೇಕೆಂದು ದೊಡ್ಡ ಒತ್ತಾಯಗಳು ಕೇಳಿ ಬಂದಿದ್ದರಿಂದ 2003-04ರಲ್ಲಿ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಜಾತಿಗಣತಿಯನ್ನು ನಡೆಸಲು 21.5 ಕೋಟಿ ರೂ ಬಿಡುಗಡೆ ಮಾಡಿತ್ತು. ಆದರೆ ಆಗಿನ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಅದು ನಡೆಯಲಿಲ್ಲ.
ಜಾತಿಗಣತಿ ಏಕೆ ಬೇಕು?
ಉದ್ಯೋಗ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ರಾಜಕೀಯ ಕ್ಷೇತ್ರಕ್ಕೆ ಅನ್ವಯಿಸಲಾಗದು. ಇದಕ್ಕಾಗಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ವಿಶ್ವಾಸಾರ್ಹ ದತ್ತಾಂಶ ಆಧರಿಸಿದ ಮಾಹಿತಿಯನ್ನು ಮೂರು ಹಂತಗಳ ಪರಿಶೀಲನೆ ಮಾಡಿ ಪ್ರತ್ಯೇಕ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕು ಎಂದು 2010ರಲ್ಲಿಯೇ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಆದೇಶ ನೀಡಿತ್ತು.
ಭಾರತದಲ್ಲಿ ದನಿಯೇ ಇಲ್ಲದೇ ಹಿಂದುಳಿದ ಸಾವಿರಾರು ಜಾತಿಗಳಿವೆ. ಸರ್ಕಾರದ ಯೋಜನೆಗಳು ಇವರನ್ನು ತಲುಪುತ್ತಿವೆಯೇ ಎಂಬ ಯೋಚನೆ ಯಾರಿಗೂ ಇಲ್ಲ. ದೊಡ್ಡ ಸಂಖ್ಯೆಯಲ್ಲಿರುವ ಜನರ ಸಮಸ್ಯೆಗಳು ಅವರ ಜಾತಿ ಕಾರಣಕ್ಕಾದರೂ ಸಮಾಜದಲ್ಲಿ ಚರ್ಚೆಗೆ ಬರುತ್ತಿವೆ. ಆದರೆ ಸಣ್ಣ ಸಂಖ್ಯೆಯ ಜಾತಿಗಳನ್ನು, ಹಿಂದುಳಿದ ಸಮುದಾಯಗಳನ್ನು, ಆದಿವಾಸಿಗಳನ್ನು ಈ ಸಮಾಜವು ಗುರುತಿಸುತ್ತಿದೆಯೇ ಎಂಬ ಪ್ರಶ್ನೆ ಕೂಡ ಇದೆ. ಇಂತಹ ಲೆಕ್ಕಕ್ಕೆ ಬಾರದೇ ಹಿಂದುಳಿದಿರುವ ಜಾತಿಯ ಜನರಿಗೆ ಸರಿಯಾದ ಪ್ರಾತಿನಿಧ್ಯ ನೀಡಬೇಕಾದರೆ ಅವರ ಗಣತಿ ಅಗತ್ಯವಿದೆ. ನಮ್ಮ ರಾಜ್ಯಗಳಲ್ಲಿ ಹಲವು ಜಾತಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿವೆ ಮತ್ತು ಸಮಾಜದಲ್ಲಿ ಇವರ ಪ್ರಾತಿನಿಧ್ಯ ಅತಿ ಕಡಿಮೆ ಇದೆ ಎಂದು ತೋರಿಸಿ ಇವರಿಗೆ ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲು ರಾಜ್ಯಗಳಿಗೆ ಜಾತಿಗಣತಿ ಅತ್ಯಗತ್ಯವಾಗಿದೆ ಎಂಬುದು ಹಲವರ ವಾದವಾಗಿದೆ