ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿರುವ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಘೋಷಣೆ ಮಾಡಲಾಗಿದೆ.
ಅಂಕೋಲಾ ತಾಲೂಕಿನ ಉಳುವರೆ ಮೂಲದ ಹೊನ್ನಳ್ಳಿಯ ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರು ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ. ಕೃಷಿ ವಿಶ್ವವಿದ್ಯಾಲಯದ 36 ನೇ ಘಟಿಕೋತ್ಸವದ ಸಂದರ್ಭದಲ್ಲಿ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರೂ ಕೃಷಿ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಥಾವರಚಂದ್ ಗೆಹ್ಲೋಟ್ ಅವರು ಸೂಚಿಸಿದ್ದಾರೆ. ಜೂನ್ 16 ರಂದು ಬೆಳಿಗ್ಗೆ 11 ಘಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು.
ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಕೃಷಿ ಸಂಶೋಧನಾ ಹಾಗೂ ಶಿಕ್ಷಣ ವಿಭಾಗದ ಮಹಾನಿರ್ದೇಶಕ ಡಾ.ಹಾಮಾಂಶು ಪಾಠಕ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕುಲಪತಿ ಡಾ.ಪಿ.ಎಲ್. ಪಾಟೀಲ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕೃಷಿ ವಿಶ್ವವಿದ್ಯಾಲಯದ ಕುಲ ಸಚಿವರ ಕಾರ್ಯಾಲಯದಿಂದ ಪದ್ಮಶ್ರೀ ತುಳಸಿ ಗೌಡ ಅವರಿಗೆ ಆಹ್ವಾನ ಪತ್ರ ನೀಡಲಾಗಿದೆ.
ಪದ್ಮಶ್ರೀ ಪುರಸ್ಕ್ರತೆ ತುಳಸಿ ಗೌಡ:
ಕಳೆದ 60 ವರ್ಷಗಳಿಂದ ಪರಿಸರ ಸಂರಕ್ಷಣೆಯ ಹಾಗೂ ಪರಿಸರದ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ ತುಳಸಿ ಗೌಡ ವೃಕ್ಷ ಮಾತೆ ಎಂದೇ ಪ್ರಸಿದ್ದಿಯನ್ನು ಪಡೆದುಕೊಂಡಿದ್ದಾರೆ. ಹಾಲಕ್ಕಿ ಸಮುದಾಯದ ಇವರು ಲಕ್ಷಾಂತರ ಮರಗಳನ್ನು ಸಾಕಿ ಬೆಳೆಸಿದ್ದರು. 12ನೇ ವಯಸ್ಸಿನಲ್ಲಿ ತುಳಸಿ ಗೌಡ ಅವರಿಗೆ ಮರಗಳ ಜೊತೆಗಿನ ಬಾಂಧವ್ಯ ಆರಂಭವಾಗಿದ್ದು, 72 ವರ್ಷವಾದ್ರೂ ಮುಂದುವರೆದಿದೆ. ಇವರ ಆರು ದಶಕಗಳ ಪರಿಸರ ಸಂರಕ್ಷಣಾ ಕಾರ್ಯವನ್ನು ಮೆಚ್ಚಿ 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿತ್ತು. ಇನ್ನು ರಾಜ್ಯೋತ್ಸವ ಪ್ರಶಸ್ತಿ, ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳ ಗರಿಯನ್ನು ತುಳಸಿಗೌಡ ಮುಡಿಗೇರಿಸಿಕೊಂಡಿದ್ದಾರೆ.