ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮೇಲಿದ್ದ ಪ್ರಕರಣಗಳಲ್ಲಿ ಒಂದಾದ ಕೋವಿಡ್ ನಿಯಮ ಮೀರಿ ಮೇಕೆದಾಟು ಪಾದಯಾತ್ರೆ ಕೇಸ್ನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಹಾಗೆಯೇ ಹೈಕೋರ್ಟ್ ಇನ್ನೆರಡು ಪ್ರಕರಣಗಳಿಗೆ ತಡೆಯಾಜ್ಞೆ ನೀಡಿದ್ದು, ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್ ದೊರೆತಿದೆ.
ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ಆಯೋಜಿಸಿದ್ದ ಪಾದಯಾತ್ರೆ ವೇಳೆ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಶುಕ್ರವಾರ ಪುರಸ್ಕರಿಸಿದೆ. ಇದೇ ವೇಳೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನೈಸರ್ಗಿಕ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕನಕಪುರ ಟೌನ್ ಠಾಣಾ ಪೊಲೀಸರು ಮತ್ತು ಬೆಂಗಳೂರಿನ ಹಲಸೂರು ಠಾಣಾ ಪೊಲೀಸರು ದಾಖಲಿಸಿದ್ದ ಪ್ರತ್ಯೇಕ ಎರಡು ಪ್ರಕರಣಗಳ ಮುಂದಿನ ಕಾನೂನು ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.
ಮೇಕೆದಾಟು ಪಾದಯಾತ್ರೆ ಪ್ರಕರಣ:
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು 2022ರ ಜ.9ರಿಂದ 10 ದಿನ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಲ್ಲದೆ, ಸಾಂಕ್ರಾಮಿಕ ರೋಗ ಹರಡಲು ಕಾರಣವಾದ ಆರೋಪದ ಮೇಲೆ ನೈಸರ್ಗಿಕ ವಿಪತ್ತು ನಿರ್ವಹಣೆ ಕಾಯ್ದೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಡಿ.ಕೆ. ಶಿವಕುಮಾರ್ ವಿರುದ್ಧ ಉಪ್ಪಾರಪೇಟೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲಸೂರು ಗೇಟ್ ಮತ್ತು ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಈ ಎಲ್ಲ ದೂರುಗಳನ್ನು ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು.
ಕೇಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಡಿಕೆಶಿ:
ಪ್ರಜಾಧ್ವನಿ ಯಾತ್ರೆ ನಡೆಸುವ ವೇಳೆ ಮಂಡ್ಯದಲ್ಲಿ 500ರೂಪಾಯಿ ನೋಟು ಕಾರ್ಯಕರ್ತರತ್ತ ಬಿಸಾಡಿದ ಪ್ರಕರಣ ಸಂಬಂಧ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ಹಿಂಪಡೆದಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರ್ಜಿಯನ್ನು ಡಿ.ಕೆ.ಶಿವಕುಮಾರ್ ಹಿಂಪಡೆದುಕೊಂಡಿದ್ದಾರೆ.