ಇಂದಿರಾ ಕ್ಯಾಂಟೀನ್ಗಳನ್ನು ಸದ್ಯದಲ್ಲೇ ಪುನಃ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಇಂದಿರಾ ಕ್ಯಾಂಟೀನ್ ಗಳ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದು, ಮುಚ್ಚಿ ಹೋಗಿರುವ ಕ್ಯಾಂಟೀನ್ ಗಳನ್ನು ಮರು ಆರಂಭಿಸುವುದು ಇತ್ಯಾದಿ ವಿಷಯಗಳನ್ನು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು.
ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭ ಮಾಡಲಾಗುವುದು. ಪ್ರತಿ ವಾರ್ಡ್ ಗೆ ಒಂದರಂತೆ ಕ್ಯಾಂಟೀನ್ ಶುರು ಮಾಡುವ ಆಲೋಚನೆಯಿದೆ. ರಾಜ್ಯದಲ್ಲಿ ಹೊಸದಾಗಿ ಎಲ್ಲಿಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯತೆ ಇದೆ ಅನ್ನುವುದನ್ನು ಪರಿಶೀಲಿಸಿ, ಅದರ ಪಟ್ಟಿಯೊಂದನ್ನು ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹೊಸ ಮೆನು, ದರದಲ್ಲಿ ಹೆಚ್ಚಳವಿಲ್ಲ:
ಈಗಿರುವ ಮೆನು ಬದಲಾವಣೆ ಮಾಡಲಾಗುವುದು. ಮೆನು ಬದಲಾದರೂ ಆಹಾರದ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ. ಇಂದಿರಾ ಕ್ಯಾಂಟೀನ್ ನಲ್ಲಿ ನೀಡಲಾಗುವ ಆಹಾರದ ದರವನ್ನು ಹೆಚ್ಚಿಸುವ ಯಾವುದೇ ಉದ್ದೇಶವನ್ನು ನಾವು ಹೊಂದಿಲ್ಲ. ಕ್ಯಾಂಟೀನ್ ಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಸಿಗಬೇಕು, ರುಚಿ ಇರಬೇಕು ಹಾಗೂ ಕ್ಯಾಂಟೀನ್ ಗಳು ಹಾಗೂ ಶುಚಿಯಾಗಿರಬೇಕು. ಇದನ್ನು ಎಲ್ಲಾ ಕ್ಯಾಂಟೀನ್ ಗಳಲ್ಲಿಯೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಭೆಯಲ್ಲಿ ಚರ್ಚೆಯಾದ ವಿಷಯಗಳು:
*ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ, ಸುಸ್ಥಿತಿ ಮತ್ತು ಕಾರ್ಯನಿರ್ವಹಣೆ ಕುರಿತು ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
* ದುರಸ್ತಿ ಅಗತ್ಯ ಇರುವಲ್ಲಿ ಕೂಡಲೇ ಕ್ರಮ ಕೈಗೊಂಡು, ಸುಸ್ಥಿತಿಯಲ್ಲಿರಬೇಕು. ಆಹಾರದ ಗುಣಮಟ್ಟ ಕಾಯ್ದುಕೊಳ್ಳಬೇಕು. ನಿಗದಿ ಪಡಿಸಿದ ಮೆನು ವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
* ಹೊಸದಾಗಿ ಟೆಂಡರ್ ಪ್ರಕ್ರಿಯೆಯನ್ನು ವಿಕೇಂದ್ರೀಕರಣಗೊಳಿಸಿ 8 ವಲಯಗಳಲ್ಲಿ ಟೆಂಡರ್ ಕರೆಯಲು ಸೂಚಿಸಲಾಯಿತು. ಪಾರದರ್ಶಕತೆ ಕಾಯ್ದುಕೊಳ್ಳಲು ಸೂಚಿಸಲಾಯಿತು.
* ಸ್ವಚ್ಛತೆ, ಗುಣಮಟ್ಟ ಹಾಗೂ ಪ್ರಮಾಣದಲ್ಲಿ ಯಾವುದೇ ರಾಜಿ ಮಾಡಬಾರದು. ಉತ್ತರ ಕರ್ನಾಟಕದಲ್ಲಿ ಸ್ಥಳೀಯ ಆಹಾರ ಒದಗಿಸಲು ಸೂಚನೆ ನೀಡಲಾಯಿತು.
* ಇಂದಿರಾ ಕ್ಯಾಂಟೀನ್ ಗೆ ಹೊಸ ಮೆನು, ಆದರೂ ದರದಲ್ಲಿ ಹೆಚ್ಚಳವಿಲ್ಲ.
*ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣ, ತಾಲ್ಲೂಕು ಕಚೇರಿಗಳಂತಹ ಜನ ಸೇರುವ ಸ್ಥಳಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು.
*ಇದುವರೆಗೂ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಗೆ ಆಗುವ ವೆಚ್ಚವನ್ನು ಬೆಂಗಳೂರು ಮಹಾನಗರ ಪಾಲಿಕೆ 70 % ಹಾಗೂ ರಾಜ್ಯ ಸರ್ಕಾರದ ವತಿಯಿಂದ 30 % ಅನುದಾನ ನೀಡಲಾಗುತ್ತಿತ್ತು. ಇನ್ಮುಂದೆ ರಾಜ್ಯ ಸರ್ಕಾರ ಮತ್ತು ಪಾಲಿಕೆಯಿಂದ ತಲಾ 50 % ಶೇರ್ ಇರಲಿದೆ.
*ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಇಂದಿರಾ ಕ್ಯಾಂಟೀನ್ ಗಳ ಖರ್ಚುವೆಚ್ಚದ ಶೇ. 70ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸಲಿದ್ದು, ಅಲ್ಲಿನ ಸ್ಥಳೀಯ ಜಿಲ್ಲಾಡಳಿತ ಶೇ. 30ರಷ್ಟು ಖರ್ಚನ್ನು ನಿಭಾಯಿಸಲಿವೆ.