ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ಹಿಂಪಡೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ, ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಸಾಕಷ್ಟು ವಿವಾದವನ್ನು ಹುಟ್ಟು ಹಾಕಿತ್ತು. ಮತಾಂತರ ತಡೆಯುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಸರ್ಕಾರ ಸಮರ್ಥಿಸಿಕೊಂಡಿತ್ತು. ಆದರೆ ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ಕಾಯ್ದೆ ವಾಪಾಸ್ ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದು ತಿಂಗಳಿನಲ್ಲಿಯೇ ಈ ಕಾಯ್ದೆಯನ್ನು ವಾಪಸ್ ಪಡೆಯುವ ನಿರ್ಣಯ ಕೈಗೊಂಡಿದೆ.
ಮತಾಂತರ ನಿಷೇಧ ಕಾಯ್ದೆ ಎಂದರೇನು?
ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ತಡೆಯುವುಕ್ಕಾಗಿ ಮತಾಂತರ ನಿಷೇಧ ಕಾಯ್ದೆಯನ್ನು ರೂಪಿಸಲಾಗಿದೆ.
ಮತಾಂತರ ನಿಷೇದದ ಪ್ರಮುಖ ಅಂಶಗಳು:
*ಬಲವಂತ, ವಂಚನೆ, ಆಮಿಷ. ಪ್ರಲೋಭನೆ, ಉದ್ಯೋಗ ಉಚಿತ ಶಿಕ್ಷಣ, ನಗದು, ಮದುವೆಯಾಗುವುದಾಗಿ ವಾಗ್ಧಾನ, ಉತ್ತಮ ಜೀವನ ಶೈಲಿಯ ಭರವಸೆ, ದೈವಿಕ ಅಸಂತೋಷ, ಒತ್ತಾಯ, ವಂಚನೆ ಮೂಲಕ ಮತಾಂತರ ಮಾಡುವುದಕ್ಕೆ ನಿಷೇಧವಿದೆ. ಒಂದು ಧರ್ಮದ ಆಚರಣೆಗಳ ಅವಹೇಳನ ಮಾಡುವುದನ್ನೂ ಆಮಿಷ ಎಂದೇ ಪರಿಗಣಿಸಲಾಗಿದೆ.
*ವ್ಯಕ್ತಿಯೊಬ್ಬ ಒಂದು ಧರ್ಮದಿಂದ ಮತ್ತೂಂದು ಧರ್ಮಕ್ಕೆ ಮತಾಂತರವಾದಾಗ ಮಾತ್ರ ಈ ಕಾಯ್ದೆ ಅನ್ವಯವಾಗುತ್ತದೆ. ಆದರೆ ಆತ ಯಾವುದೇ ಕಾರಣದಿಂದ ಮತಾಂತರಗೊಂಡು ವಾಪಸ್ ಮಾತೃಧರ್ಮಕ್ಕೆ ಆಗಮಿಸುವುದಾದರೆ ಈ ಕಾಯ್ದೆ ಅನ್ವಯವಾಗುವುದಿಲ್ಲ.
*ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ.
* ಎಸ್ಸಿ, ಎಸ್ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವಂತಿಲ್ಲ.
* ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು.
*ಮತಾಂತರಗೊಂಡ ಎಸ್ಸಿ, ಎಸ್ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ, ಇತರೆ ಸೌಲಭ್ಯ ರದ್ದು.
*ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್ಜಿಓಗಳು ಪಾಲ್ಗೊಳ್ಳುವಂತಿಲ್ಲ.
* ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಸ್ಥಗಿತ.
ಬಲವಂತದ ಮತಾಂತರಕ್ಕೆ ಏನು ಶಿಕ್ಷೆ?
* ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ.
* ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3 ರಿಂದ 5 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ.
* ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ.
* ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ.
* ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ.
* ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.
ಸ್ವ ಇಚ್ಚೆಯಿಂದ ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಿದೆ ನಿಯಮಾವಳಿಗಳು:
*ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಆರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.
*ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.
*ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪನೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.
*ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.
*ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.