ರಾಜ್ಯದಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚೆಯಾಗುತ್ತಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಕುರಿತು ಮಾತುಗಳು ಕೇಳಿ ಬಂದಿದ್ದವು.
ರಾಜ್ಯ ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ನನ್ನ ಸ್ಥಾನಕ್ಕೆ ಮೌಖಿಕವಾಗಿ ಹಾಗೂ ಲಿಖಿತವಾಗಿ ರಾಜೀನಾಮೆ ಸಲ್ಲಿಸಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಬಳ್ಳಾರಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿದ್ದ ಎರಡು ವರ್ಷಗಳಲ್ಲಿ ಹಲವಾರು ಕಾರಣಗಳಿಗೆ ಸುದ್ದಿಯಾಗಿದ್ದರು. ರಾಜ್ಯಾಧ್ಯಕ್ಷರಾದ ಕೆಲ ಸಮಯದಲ್ಲೇ ಅವರದ್ದೆನ್ನಲಾದ ತುಳು ಭಾಷೆಯ ಆಡಿಯೋವೊಂದು ವೈರಲ್ ಆಗಿತ್ತು. ಕಳೆದ ವರ್ಷ ನಡೆದಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಸಂದರ್ಭದಲ್ಲಿ, ಬಿಜೆಪಿ ಕಾರ್ಯಕರ್ತರೇ ನಳಿನ್ ಕುಮಾರ್ ಕಟೀಲು ಅವರ ಕಾರನ್ನು ಅಲುಗಾಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ವೇದಿಕೆಯ ಮೇಲಿನ ಅವರ ಕೆಲವು ಹೇಳಿಕೆಗಳು ಪಕ್ಷಕ್ಕೂ ಮುಳುವಾಗಿದ್ದವು. ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದ ಅವರು ಕಳೆದ ಬಾರಿಯ ವಿಧಾನಸಭಾ ಚುನಾವಣೆಯ ವೇಳೆ ’ಇದು ಟಿಪ್ಪು ಮತ್ತು ಸಾವರ್ಕರ್’ ನಡುವಿನ ಯುದ್ದ ಎಂದು ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎನ್ನುವ ಅವರ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿತ್ತು.
ಇನ್ನು ಮುಂದಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ರಾಜ್ಯದ ಜನರಲ್ಲಿದೆ.