ವಿವಿಧ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆಯಲು ನಿರ್ಧರಿಸಿರುವ ಪೊಲೀಸರು ಪುನೀತ್ಗೆ ತಿಳಿವಳಿಕೆಯ ನೋಟಿಸ್ ಜಾರಿ ಮಾಡಿದ್ದಾರೆ.
ಪುನೀತ್ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ರಾಮನಗರ ಜಿಲ್ಲೆಯ ಸಾತನೂರು ಠಾಣೆ, ವಿಜಯನಗರ ಜಿಲ್ಲೆಯ ಹಂಪಿ ಟೂರಿಸಂ ಪೊಲೀಸ್ ಠಾಣೆ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಕೊಲೆ, ಹಲ್ಲೆ, ಜೀವ ಬೆದರಿಕೆ, ದೊಂಬಿ ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ಪುನೀತ್ ವಿರುದ್ಧ ರೌಡಿಶೀಟ್ ತೆರೆಯಲು ನಿರ್ಧರಿಸಲಾಗಿದೆ. ಈ ಸಂಬಂಧ ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ಪುನೀತ್ಗೆ ನೋಟಿಸ್ ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ತಿಳಿವಳಿಕೆ ನೋಟಿಸ್ನಲ್ಲಿ ಏನಿದೆ?
ಹಲವು ಪ್ರಕರಣಗಳ ಆರೋಪಿಯಾಗಿರುವ ಹಾಗೂ ಬಂಧನಕ್ಕೆ ಒಳಗಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ನಿಮ್ಮ ವಿರುದ್ಧ ರೌಡಿಶೀಟ್ ತೆರೆಯಲು ಅನುಮತಿಗಾಗಿ ಚಾಮರಾಜಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ವರದಿ ಸಲ್ಲಿಸಿದ್ದಾರೆ. ದೊಂಬಿ, ಕೊಲೆ, ಪ್ರಾಣಬೆದರಿಕೆ ಮತ್ತು ಇನ್ನಿತರ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ಮೇಲೆ ಏಕೆ ರೌಡಿಶೀಟ್ ತೆರೆಯಬಾರದು ಎಂಬುದಕ್ಕೆ ನನಗೆ ವಿವರಣೆ ಸಲ್ಲಿಸಬಹದು. ಇಲ್ಲದಿದ್ದರೆ ವಿವರಣೆ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು, ಪುನೀತ್ ಕರೆಹಳ್ಳಿಗೆ ಜಾರಿಗೊಳಿಸಿರುವ ನೋಟಿಸ್ನಲ್ಲಿ ಉಲ್ಲ ಖಿಸಿದ್ದಾರೆ.
ಪುನೀತ್ ಕೆರೆಹಳ್ಳಿ ಪ್ರಕರಣ:
ಮಾರ್ಚ್ 31 ರಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಬಳಿ ಆಕ್ರಮವಾಗಿ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ವೇಳೆ ಪುನೀತ್ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತದ್ದ ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಮರು ದಿನ ಕ್ಯಾಂಟರ್ನಲ್ಲಿದ್ದ ಇದ್ರೀಷ್ ಪಾಷ(35) ಶವವಾಗಿ ಪತ್ತೆಯಾಗಿದ್ದರು. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಬಳಿ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಸಾತನೂರು ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರು ಏಪ್ರಿಲ್ 05ರಂದು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆ ಬಳಿಕ ಪುನೀತ್ ಕೆರೆಹಳ್ಳಿ ಜಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ.