ಮುಂಬರುವ 2024 ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಮಲ ಪಾಳಯ ತನ್ನ ಸಂಘಟನೆಯಲ್ಲಿ ದೊಡ್ಡ ಬದಲಾವಣೆ ತಂದಿದೆ. ನಾಲ್ಕು ರಾಜ್ಯಗಳ ಅಧ್ಯಕ್ಷರನ್ನು ಬದಲಾಯಿಸಿ ಆಶ್ಚರ್ಯಕರ ರೀತಿಯಲ್ಲಿ ಹೊಸಬರಿಗೆ ಮಣೆ ಹಾಕಿದೆ. ತೆಲಂಗಾಣ, ಆಂಧ್ರ ಪ್ರದೇಶ, ಜಾರ್ಖಂಡ ಹಾಗೂ ಪಂಜಾಬ್ ಬಿಜೆಪಿ ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಿಸಿದೆ. ಜೊತೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಆಂಧ್ರ ಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಅವರ ಹೆಸರನ್ನು ಸೇರಿಸಲಾಗಿದೆ.
2024ರ ಲೋಕಸಭಾ ಚುನಾವಣೆ ಹಾಗೂ ವಿವಿಧ ರಾಜ್ಯಗಳು ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿಯು ತನ್ನ ಪಕ್ಷ ಸಂಘಟನೆಯಲ್ಲಿ ಭಾರೀ ಬದಲಾವಣೆಯನ್ನು ಮಾಡಿಕೊಂಡಿದೆ. ನಾಲ್ಕು ರಾಜ್ಯಗಳ ಬಿಜೆಪಿ ಘಟಕದ ಅಧ್ಯಕ್ಷರನ್ನು ಬದಲಾಯಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದ್ದು, ಬಂಡಿ ಸಂಜಯ್ ಅವರಿಗೆ ಗೇಟ್ ಪಾಸ್ ನೀಡಲಾಗಿದೆ. ಆಂಧ್ರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಂಧ್ರ ಪ್ರದೇಶದ ಮಾಜಿ ಸಿಎಂ ಎನ್ಟಿಆರ್ ಅವರ ಪುತ್ರಿ ಡಿ ಪುರಂದೇಶ್ವರಿ ಅವರನ್ನು ನೇಮಿಸಲಾಗಿದೆ. ಜಾರ್ಖಂಡ್ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಸಿಎಂ ಬಾಬುಲಾಲ್ ಮರಂಡಿ ಅವರನ್ನು ನೇಮಿಸಲಾಗಿದೆ.
ಇನ್ನು, ಪಂಜಾಬ್ ಈ ಹಿಂದೆ ಸುನೀಲ್ ಜಾಕರ್ ಅವರು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಈಗ ಸುನೀಲ್ ಜಾಕರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. 2022ರ ಮೇನಲ್ಲಿ ನಡೆದ ಪಂಜಾಬ್ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಏಥಲ್ ರಾಜೇಂದ್ರ ಅವರನ್ನು ತೆಲಂಗಾಣ ಬಿಜೆಪಿಯ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದೆ. ಇವರು ಕೂಡ 2021ರಲ್ಲಿ ಟಿಆರ್ಎಸ್ ತೊರೆದು ಬಿಜೆಪಿ ಸೇರಿದ್ದರು.
ಇದರ ಜೊತೆ ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಬಿಜೆಪಿಯಲ್ಲೂ ಕೂಡ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಕೇಳಿಬಂದಿದ್ದವು. ಶೀಘ್ರದಲ್ಲಿಯೇ ಹೊಸಬರ ನೇಮಕದ ನಿರೀಕ್ಷೆ ಇತ್ತು. ಆದರೆ, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ನಿರ್ಧಾರವನ್ನು ಬಿಜೆಪಿ ಇದುವರೆಗೂ ತೆಗೆದುಕೊಂಡಿಲ್ಲ. ಅದಲ್ಲದೇ ಕರ್ನಾಟಕದಲ್ಲಿ ಇದುವರೆಗೂ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನನ್ನು ಕೂಡ ಹೈಕಮಾಂಡ್ ಆಯ್ಕೆ ಮಾಡಿಲ್ಲ.