ಬೆಂಗಳೂರು: ರಾಜ್ಯ ಪೋಲೀಸ್ ಇಲಾಖೆಯ ಡ್ರೆಸ್ ಕೋಡ್ ಕುರಿತು ಯಾವುದೇ ಹೊಸ ನಿರ್ಬಂಧ ವಿಧಿಸಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ವರದಿ ಆಗಿರುವಂತೆ ಪೊಲೀಸರು ಹಣೆಗೆ ಕುಂಕುಮ ಇಡಬಾರದು ಎಂದು ನಾನು ಎಲ್ಲೂ ಹೇಳಿಲ್ಲ. ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು. ಆದರೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಜೂನ್ 8 ರಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೋಲೀಸರು ಹಣೆಗೆ ತಿಲಕ ಇಡಬಾರದು ಅಂತಾ ನಾನು ಎಲ್ಲೂ ಹೇಳಿಲ್ಲ. ಆದರೆ ಪೊಲೀಸರಿಗೆ ಯೂನಿಫಾರ್ಮ್ ಇರುವುದರಿಂದ ಇಲಾಖೆಗೆ ತನ್ನದೇ ಆದ ನಿಯಮ ಇವೆ. ಆ ನಿಯಮಗಳ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಬಹುದು. ಇದರಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದರು.
ಕಾಂಗ್ರೆಸ್ ಹಿಂದೂಗಳನ್ನ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಕೋಮುವಾದ ಒಂದು ಸಮುದಾಯಕ್ಕೆ ಸೇರಿದಲ್ಲ. ಎಲ್ಲಾ ಸಮುದಾಯದಲ್ಲೂ ಕೋಮುವಾದ ಇದೆ. ಕೋಮುವಾದ ತಡೆಗೆ ಪೋಲಿಸ್ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗವನ್ನು ರಚಿಸುತ್ತೇವೆ. ಈ ವಿಭಾಗದ ಪೋಲೀಸ್ ಸಿಬ್ಬಂದಿ ಯಾರು ಕೋಮು ಭಾವನೆಗಳಿಗೆ ಪ್ರಚೋದನೆ ನೀಡುವವರ ಮೇಲೆ ಕಣ್ಗಾವಲು ಇರಿಸುತ್ತಾರೆ. ಕರಾವಳಿ ಭಾಗದ ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಗಳಲ್ಲಿ ಕೋಮುವಾದ ತಡೆ ಘಟಕ ಸ್ಥಾಪಿಸುವಂತೆ ಕೋರಿಕೆ ಬಂದಿದೆ. ಆದದ್ದರಿಂದ ಕರಾವಳಿ ಭಾಗದಲ್ಲಿ ಕೋಮುವಾದ ತಡೆ ಘಟಕ ಸ್ಥಾಪಿಸಲಾಗುತ್ತಿದೆ. ಹೀಗಾಗಿ ಬೇರೆ ಕಡೆ ಇದನ್ನ ಮಾಡೋ ಅಗತ್ಯತೆ ಬರೋದಿಲ್ಲ ಎಂದಿದ್ದಾರೆ.
ನೈತಿಕ ಪೊಲೀಸ್ ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುವುದಾಗಿ ಇತ್ತೀಚೆಗೆ ಮಂಗಳೂರಿನಲ್ಲಿ ಡಾ. ಜಿ. ಪರಮೇಶ್ವರ್ ಹೇಳಿದ್ದರು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ಘಟಕ ಆರಂಭಿಸುತ್ತೇವೆ ಎಂದಿದ್ದರು. ಆ್ಯಂಟಿ ಕಮ್ಯುನಲ್ ವಿಂಗ್ ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಅಂತಾ ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.
ಸಮಸ್ಯೆಗಳು ಸವಾಲುಗಳ ಬಗ್ಗೆ ವಿಚಾರಿಸಿದ್ದೇನೆ. ನನಗೆ ಇದು ಹೊಸದಲ್ಲ. ನಾನು ಮೂರನೇ ಭಾರೀ ಗೃಹ ಸಚಿವನಾಗಿದ್ದೇನೆ. ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.