ಬೆಂಗಳೂರು: ಹಿಂದಿದ್ದ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ಸಂಘ ಸಂಸ್ಥೆಗಳಿಗೆ ಸರ್ಕಾರಿ ಭೂಮಿಯನ್ನು ಹಂಚಿಕೆ ಮಾಡಿದ್ದು ಅದರ ಮರುಪರಿಶೀಲನೆಗೆ ಈಗಿನ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಹಿಂದಿನ ಸರ್ಕಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಅದರ ಅಂಗಸಂಸ್ಥೆಗಳಿಗೆ ನೂರಾರು ಎಕರೆ ಭೂಮಿಯನ್ನು ಮಂಜೂರು ಮಾಡಿದ್ದು ಈ ಭೂಮಿಯ ವಿವರಗಳನ್ನು ಪರಿಶೀಲಿಸಲು ಕಂದಾಯ ಇಲಾಖೆಗೆ ಆದೇಶ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶಾದ್ಯಂತ ಹತ್ತು ಸಾವಿರಕ್ಕೂ ಅಧಿಕ ಶಾಲೆಗಳನ್ನು ನಡೆಸುತ್ತಿದ್ದು ಶೈಕ್ಷಣಿಕ ಮತ್ತು ಸಂಘಟನೆಯ ಉದ್ದೇಶಕ್ಕಾಗಿ ರಾಜ್ಯ ಸರ್ಕಾರದಿಂದ ಭೂಮಿಯನ್ನು ಮಂಜೂರಾತಿ ಮಾಡಿಸಿಕೊಂಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಆರ್ಎಸ್ಎಸ್ ಗೆ ಮಾಡಿರುವ ಭೂ ಮಂಜೂರಾತಿಗೆ ವಿರೋಧ ವ್ಯಕ್ತಪಡಿಸಿದ್ದು ಈ ಮಂಜೂರಾತಿಯನ್ನು ರದ್ದುಪಡಿಸಲು ಮುಂದಾಗಿದೆ.
ರಾಜ್ಯ ಕಂದಾಯ ಇಲಾಖೆಯ ಅಧಿಕಾರಿಗಳು ವಿವಿಧ ಜಿಲ್ಲೆಗಳಲ್ಲಿ ಅರ್ಎಸ್ಎಸ್ ಗೆ ಮಂಜೂರಾಗಿರುವ ಭೂಮಿಯ ಕುರಿತು ಪಟ್ಟಿ ಮಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಹರಳೂರಿನಲ್ಲಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರಕ್ಕೆ ನೀಡಿರುವ 116 ಎಕರೆ ಭೂಮಿಯನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
2021-22ರಲ್ಲಿ ಬಿಜೆಪಿ ಸರ್ಕಾರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಸೇರಿದ ಭೂಮಿಯನ್ನು ಸೆಸ್ ಗೆ 50 ಕೋಟಿ ರೂ.ಗೆ ಹಂಚಿಕೆ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಭೂಮಿಯ ಬೆಲೆ 300 ಕೋಟಿ ರೂ.ಗಿಂತ ಹೆಚ್ಚು ಮತ್ತು ಸೆಸ್ನಲ್ಲಿರುವ ಜನರು ಆರ್ಎಸ್ಎಸ್ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ವಿಪಕ್ಷ ನಾಯಕರಾಗಿದ್ದ ಸಮಯದಲ್ಲಿ ಸಿದ್ದರಾಮಯ್ಯ ಆರೋಪಿಸಿದ್ದರು.
ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಸರ್ಕಾರೇತರ ಸಂಸ್ಥೆ ರಾಷ್ಟ್ರೋತ್ಥಾನ ಪರಿಷತ್ತಿಗೆ ಶೈಕ್ಷಣಿಕ ಉದ್ದೇಶಗಳಿಗಾಗಿ ಮಂಜೂರು ಮಾಡಲಾದ 8 ಎಕರೆ 32 ಗುಂಟಾ ಭೂಮಿಯನ್ನು ಸರ್ಕಾರ ಪರಿಶೀಲಿಸುತ್ತಿದೆ. ಹೊಸಪೇಟೆ ತಾಲೂಕಿನ ಜಂಬುನಾಥನಹಳ್ಳಿಯಲ್ಲಿ ಇದೇ ಸಂಸ್ಥೆಗೆ ಮಂಜೂರಾಗಿದ್ದ ಐದು ಎಕರೆ ಜಮೀನು ಕೂಡ ಸರಕಾರದ ಅಧೀನದಲ್ಲಿದೆ. ಕಲಬುರಗಿ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಆನೇಕಲ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರಾಷ್ಟ್ರೋತ್ಥಾನ ಪರಿಷತ್ತಿಗೆ ಮಂಜೂರಾದ ಸುಮಾರು 25-30 ಎಕರೆ ಭೂಮಿಯನ್ನು ಸರ್ಕಾರ ಪರಿಶೀಲಿಸುತ್ತಿದೆ.
ದಕ್ಷಿಣ ಬೆಂಗಳೂರಿನ ಚನ್ನೇನಹಳ್ಳಿಯಲ್ಲಿ ಜನ ಸೇವಾ ಟ್ರಸ್ಟ್ ಹೆಸರಿನ ಸಂಸ್ಥೆಗೆ ಮಂಜೂರಾಗಿದ್ದ 40.07 ಎಕರೆ ಜಮೀನು ಕಂದಾಯ ಇಲಾಖೆಯ ಪರಿಶೀಲನೆಯಲ್ಲಿದೆ. ತಾವರೆಕೆರೆಯಲ್ಲಿ ಇದೇ ಟ್ರಸ್ಟ್ಗೆ ಮಂಜೂರಾತಿಯಾಗಿದೆ ಎಂದು ಹೇಳಲಾಗಿದ್ದ 25 ಎಕರೆ ಜಮೀನು ಕೂಡ ಪರಿಶೀಲನೆಯಲ್ಲಿದೆ.
ಶಿವಮೊಗ್ಗದಲ್ಲಿ ನೀರಾವರಿ ಇಲಾಖೆಗೆ ಸೇರಿದ ಎರಡು ಎಕರೆ ಜಾಗವನ್ನು ಅಧ್ಯಯನ, ಸಂಶೋಧನೆ ಮತ್ತು ತರಬೇತಿ ಕೇಂದ್ರದ ಹೆಸರಿನಲ್ಲಿ ಸಂಸ್ಥೆಯೊಂದಕ್ಕೆ ಮಂಜೂರು ಮಾಡಲಾಗಿತ್ತು.
ಮುಧೋಳದಲ್ಲಿ ಬಿಜೆಪಿ ಕಚೇರಿ ನಿರ್ಮಾಣಕ್ಕೆ 134 ಚ.ಮೀ.ನಷ್ಟು ಜಾಗ ನೀಡಲಾಗಿದೆ ಎನ್ನಲಾಗಿದ್ದು, ಅದರ ಪರಿಶೀಲನೆಯೂ ನಡೆಯುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರವು ಮಂಜೂರು ಮಾಡಿದ ಹಲವಾರು ಜಮೀನುಗಳನ್ನು ಸರ್ಕಾರ ಪರಿಶೀಲಿಸುತ್ತಿದೆ.
ದೊಡ್ಡಬಳ್ಳಾಪುರ ತಾಲೂಕಿನ ಚನ್ನಾದೇವಿ ಅಗ್ರಹಾರ ಗ್ರಾಮದಲ್ಲಿ ಗ್ರಾಮಸ್ಥರ ವಿರೋಧದ ನಡುವೆ 5 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿದ ಆರೋಪ ಕೇಳಿಬಂದಿದೆ. ಹೆಚ್ಎಂಆರ್ ಚಿಕ್ಕಗುಳ್ಳಪ್ಪ ಎಜುಕೇಶನ್ ಟ್ರಸ್ಟ್ ಮಂಜೂರು ಮಾಡಿರುವ 5 ಎಕರೆ ಜಮೀನನ್ನು ಈ ಹಿಂದಿನ ಸರ್ಕಾರದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್ ಆದೇಶದ ಮೇರೆಗೆ ಮಂಜೂರು ಮಾಡಿ ಸ್ಥಳಿಯರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.
ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಚೆನ್ನಾದೇವಿ ಅಗ್ರಹಾರ ಗ್ರಾಮದ ಸರ್ವೆ ನಂಬರ್ 25 ರಲ್ಲಿರುವ 5 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಜಾನುವಾರುಗಳು ಮತ್ತು ಜನರಿಗೆ ಅನುಕೂಲವಾಗಬೇಕಿದ್ದ ಜಮೀನು ಇದಾಗಿದೆ. ಆದರೆ ಯಾವುದೋ ಸಂಸ್ಥೆಗೆ ನೀಡಿರುವುದರಿಂದ ಸ್ಥಳೀಯ ಗ್ರಾಮಸ್ಥರಿಗೆ ಅನ್ಯಾಯ ಆಗಿದೆ. ಈ ಭೂ ಮಂಜೂರಾತಿಯನ್ನು ರದ್ದು ಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು.